
ಬೆಂಗಳೂರು : ಕಾಂಗ್ರೆಸ್ ಸರಕಾರ ಈಗಾಗಲೇ ಸಾಲು ಸಾಲು ಹಗರಣದ ಆರೋಪಗಳನ್ನು ಸುತ್ತಿಕೊಂಡಿದೆ, ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿ ಹಗರಣ, ಮುಡಾ ಹಗರಣ, ಗ್ಯಾರಂಟಿ ಯೋಜನೆಗಳ ಅಸಮರ್ಪಕ ನಿರ್ವಹಣೆ ಸೇರಿದಂತೆ ಹತ್ತಾರು ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಮತ್ತು ಜೆಡಿಎಸ್ ಸಿದ್ಧತೆ ನಡೆಸಿದ್ದು, ವಿಪಕ್ಷಗಳನ್ನು ಎದುರಿಸಲು ತಲೆಕೆಡಿಸಿಕೊಂಡಿರುವ ಸರಕಾರ.
ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಉಭಯ ಸದನಗಳಲ್ಲಿ ವಾಕ್ಸಮರಕ್ಕೆ ಸಜ್ಜಾಗಿದೆ. ಈ ತಿಂಗಳ 26ರವರೆಗೆ 16ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ನಡೆಯಲಿದೆ. ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ, ವಾಲ್ಮೀಕಿ ನಿಗಮದಲ್ಲಿನ 187 ಹಗರಣ ಆರೋಪ ಬಿಜೆಪಿಗೆ ಅಸ್ತ್ರವಾಗಿದೆ.
ವಿಪಕ್ಷಗಳ ರಣತಂತ್ರ
ಅಧಿವೇಶನದಲ್ಲಿ ವಾಲ್ಮೀಕಿ ನಿಗಮದ ಹಗರಣ ,ಮುಡಾ ಸೈಟ್ ಹಂಚಿಕೆ ಹಗರಣ, ಸೇರಿದಂತೆ ಹಲವು ವಿಚಾರಗಳನ್ನು ಇಟ್ಟುಕೊಂಡು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಿರ್ಧರಿಸಿವೆ. ಈ 2 ವಿಷಯಗಳ ತಾರ್ಕಿಕ ಅಂತ್ಯಕ್ಕೆ ತಲುಪುವವರೆಗೂ ಹೋರಾಟ ಮುಂದಾಗಿವೆ. ಇದಲ್ಲದೆ ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗೆ ಬಳಕೆ, ಬೆಲೆ ಏರಿಕೆ, ಡೆಂಘೀ ನಿರ್ಲಕ್ಷ್ಯ, ಕಾನೂನು ಸುವ್ಯವಸ್ಥೆ ವಿಷ್ಯಗಳನ್ನು ಸನ್ನಿವೇಶ ಆಧಾರಿತವಾಗಿ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ. ಸದನದಲ್ಲಿ ಯಾವುದೇ ವಿಷಯಕ್ಕೆ ಆರಂಭದಲ್ಲೇ ಪ್ರತಿಭಟನೆ ಬೇಡ. ವಿಷಯಗಳನ್ನು ಪ್ರಸ್ತಾಪಿಸಿದ ಬಳಿಕವೇ ಕೊನೆಯಲ್ಲಿ ಪ್ರತಿಭಟನೆ ಮಾಡಲು ತಂತ್ರ ರೂಪಿಸಿವೆ ಎಂದು ಹೇಳಲಾಗುತ್ತಿದೆ.
ಇನ್ನು ಸರಕಾರ ವಿಪಕ್ಷಗಳಿಗೆ ಉತ್ತರ ಕೊಡಲು ಸಜ್ಜಾಗಿದೆ.
ಬಿಜೆಪಿ ಸರಕಾರದಲ್ಲಿ ನಡೆದ ಭ್ರಷ್ಟಾಚಾರದ ಆರೋಪಗಳನ್ನ ಮುಂದಿಟ್ಟುಕೊಂಡು ತಿರುಗೇಟು ನೀಡಲು ಸರ್ಕಾರ ಸಿದ್ಧತೆ ನಡೆಸಿದೆ . ಜೊತೆಗೆ ಬಿಜೆಪಿ ನಾಯಕ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಆರೋಪ, ಬಿಜೆಪಿ 40% ಕಮಿಷನ್ ಆರೋಪ, ಕೊರೊನಾ ಕಾಲದ ನಡೆದ ಹಗರಣ, ಬಿಟ್ ಕಾಯಿನ್ ಹಗರಣ ಹಾಗೂ ದೇವರಾಜ ಅರಸು ಟ್ರಕ್ ಟರ್ಮಿನಲ್ನಲ್ಲಿ 47ಕೋಟಿ ರೂಪಾಯಿ ಹಗರಣದಲ್ಲಿ ಬಿಜೆಪಿಯ ಮಾಜಿ ಶಾಸಕ ವೀರಯ್ಯನನ್ನು ಬಂಧಿಸಲಾಗಿದೆ. ಈ ವಿಚಾರಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ತಿರುಗೇಟು ನೀಡಲು ಸರಕಾರ ಸಜ್ಜಾಗಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಬಂಧನ ಹಾಗೂ ಶಾಸಕ ಬಸನಗೌಡ ದದ್ದಲ್, ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ನಾಪತ್ತೆ ಆಗಿರುವಂಥದ್ದು ಇದೆಲ್ಲವೂ ಪ್ರಮುಖ ಚರ್ಚೆಯಾಗುವ ಸಾಧ್ಯತೆಗಳಿವೆ.